ಮಂಗಳೂರು : ಶಿಕ್ಷಕರು ನಿಸ್ವಾರ್ಥ ಸೇವಾ ಮನೋಭಾವ ಮತ್ತು ಶ್ರದ್ಧೆಯಿಂದ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಧಾರೆ ಎರೆದು ಭವಿಷ್ಯದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಶ್ರೇಷ್ಠ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ರೋಟರಿ ಮಾಜಿ ಜಿಲ್ಲಾ ಸಹಾಯಕ ಗವರ್ನರ್ ಡಾ.ರಂಜನ್ ಹೇಳಿದರು.
ಅವರು ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಆಶ್ರಯದಲ್ಲಿ, ಸಂಸ್ಥೆಯ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತಾ ಯೋಜನೆ, ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರುವಾರ ನಗರದ ಆಫೀಸರ್ಸ್ ಕ್ಲಬ್ನಲ್ಲಿ ಜರುಗಿದ ಅಂತಾರಾಷ್ಟ್ರೀಯ ರೋಟರಿ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ. ಕಾನೂನು ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಉದಯ ಕುಮಾರ್ ಮತ್ತು ಮಾಣಿಯ ದ.ಕ. ಜಿಲ್ಲಾ ಪಂಚಾಯತ್ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆ ಮತ್ತು ನೀಡಿದ ಗಮನಾರ್ಹ ಕೊಡುಗೆ, ಸಾಧಿಸಿದ ಅಮೂಲ್ಯ ಸಾಧನೆಯನ್ನು ಪರಿಗಣಿಸಿ ಅಂತಾರಾಷ್ಟ್ರೀಯ ರೋಟರಿ ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಶಸ್ತಿ ವಿಜೇತರು, ರೋಟರಿ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಮನೋಭಾವವನ್ನು ಕೊಂಡಾಡಿ, ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ. ಇದೊಂದು ಬಯಸದೆ ಬಂದ ಭಾಗ್ಯ ಎಂದು ನುಡಿದು, ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
ಸಂಸ್ಥೆಯ ಅಧ್ಯಕ್ಷೆ ಸಜ್ಞಾ ಭಾಸ್ಕರ್ ಸ್ವಾಗತಿಸಿ, ಪ್ರಶಸ್ತಿಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಕೋಮು ಸೌಹಾರ್ದತೆ ಮತ್ತು ಸಹೋದರತೆಯನ್ನು ಸಾರುವ ಓಣಂ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವೇದಿಕೆಯಲ್ಲಿ ರೋಟರಿ ಮಂಗಳೂರು ಸಿಟಿ ಸಂಸ್ಥೆಯ ವೃತ್ತಿಪರ ಸೇವಾ ನಿರ್ದೇಶಕರಾದ ನಿತಿನ್, ಸಂಸ್ಥೆಯ ದಂಡಾಧಿಕಾರಿ ಸರಿತಾ ಡಿಸೋಜ ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ಪದ್ಮನಾಭ ನಾಯಕ್ ವಂದಿಸಿದರು.