ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ Dr. Nagalakshmi Chowdhary ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪುತ್ತೂರಿಗೆ ಭೇಟಿ ನೀಡಿದ ವೇಳೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆ ಯುವತಿ ಮತ್ತು ಆಕೆಯ ತಾಯಿಯನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದರು. ಸಂಕಷ್ಟದ ಸಂದರ್ಭದಲ್ಲಿ ಧೈರ್ಯವಾಗಿ ನಿಲ್ಲುವಂತೆ ಮನವಿ ಮಾಡಿದ ಅವರು, ಎಲ್ಲಾ ರೀತಿಯ ಹೋರಾಟಕ್ಕೂ ಮಹಿಳಾ ಆಯೋಗ ಜೊತೆಯಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.
ಸಂತ್ರಸ್ತೆ ಯುವತಿಗೆ ಮತ್ತೆ ಶಿಕ್ಷಣ ಮುಂದುವರಿಸುವಂತೆ ಸಲಹೆ ನೀಡಿದ ಅವರು, ವಿದ್ಯಾಭ್ಯಾಸ ಮುಂದುವರಿಸಲು ಅಗತ್ಯವಾದ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದಾಗಿ ತಿಳಿಸಿದರು.
ಯಾವುದೇ ಕಾರಣಕ್ಕೂ ಜೀವನದಲ್ಲಿ ಕುಗ್ಗಿ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಧೈರ್ಯ ತುಂಬಿದರು.
ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ ಅವರು, ಮಹಿಳಾ ಆಯೋಗವು ಸಂತ್ರಸ್ತೆಯ ಪರ ತಾಯಿಯಂತೆ ನಿಂತು ಸಹಾಯ ಮಾಡಲಿದೆ ಎಂದು ಹೇಳಿದರು.
ಎಲ್ಲಾ ಸಂತ್ರಸ್ತ ಮಹಿಳೆಯರಿಗೂ ಆಯೋಗ ತಾಯಿಯಿದ್ದಂತೆ ಕೆಲಸ ಮಾಡುತ್ತಿದ್ದು, ತಾಯಿ ಸ್ಥಾನದಲ್ಲಿ ನಿಂತು ಮಹಿಳೆಯರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ಅವರು ತಿಳಿಸಿದರು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
Post a Comment