ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡಿದ ಆರೋಪ: ಬೆಂಗಳೂರಿನ ವ್ಯಕ್ತಿ ಬಂಧನ

ವಿಟ್ಲ: ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ ಆರೋಪದಡಿ ಬೆಂಗಳೂರಿನ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಒಂದು ಪೋಸ್ಟ್‌ಗೆ 'ಸನಾತನಿ ಸಿಂಹ' ಎಂಬ ಫೇಸ್‌ಬುಕ್‌ ಪೇಜ್‌ನ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್‌ ಮಾಡಲಾಗಿತ್ತು. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2025ರ ಸೆಪ್ಟೆಂಬರ್ 18ರಂದು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 353(2) ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು, ಬೆಂಗಳೂರು ವಿದ್ಯಮಾನ್ಯ ನಗರದ ನಿವಾಸಿ ಆನಂದ್ ಎ. ಎಂಬ ಆರೋಪಿಯನ್ನು ಜೂನ್ 27, 2026ರಂದು ಬಂಧಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಆರೋಪಿಯ ವಿರುದ್ಧ ಈ ಹಿಂದೆಯೂ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದಡಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous Post Next Post